ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ʻಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆʼ (ಕೆಎಎಸ್ಎಸ್) (karnataka arogya sanjeevani) ಜಾರಿಗೆ ಸಂಬಂಧಿಸಿದಂತೆ ಪರಿಷ್ಕೃತ ಕಾರ್ಯನೀತಿಯನ್ನು ರಾಜ್ಯ ಸರ್ಕಾರ ಶುಕ್ರವಾರ ಪ್ರಕಟಿಸಿದೆ.
ಇದರಿಂದಾಗಿ ಈ ಯೋಜನೆಯ ಪೂರ್ಣ ಪ್ರಮಾಣದ ಜಾರಿಗೆ ಇದ್ದ ಅಡೆ-ತಡೆಗಳು ದೂರವಾದಂತಾಗಿದೆ. ರಾಜ್ಯ ಉಚ್ಚ ನ್ಯಾಯಾಲಯದ ನೌಕರರು, ರಾಜ್ಯ ವಿಧಾನ ಮಂಡಲದ ನೌಕರರು, ʻಆರೋಗ್ಯ ಭಾಗ್ಯ’ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಪೊಲೀಸ್ ಇಲಾಖೆಯ ಸಿಬ್ಬಂದಿ, ಕರ್ನಾಟಕ ನ್ಯಾಯಾಂಗ ಅಧಿಕಾರಿಗಳು, ಅಖಿಲ ಭಾರತ ಸೇವೆಗೆ ಸೇರಿದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ನಿಗಮ/ ಮಂಡಳಿಗಳು, ಸಹಕಾರ ಸ೦ಸ್ಥೆಗಳ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಇತರೆ ಸಸ್ಥೆಗಳ ನೌಕರರು ಈ ಯೋಜನೆಯ ಲಾಭ ಪಡೆಯ ಬಹುದಾಗಿದೆ.
2020- 21 ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಈ ಯೋಜನೆಯನ್ನು ಪ್ರಕಟಿಸಲಾಗಿತ್ತು. ಆದರೆ ಯೋಜನೆ ಲಾಭ ಪಡೆಯಲು ರಾಜ್ಯ ಸರ್ಕಾರಿ ನೌಕರರಿಗೆ ಮತ್ತು ಕುಟುಂಬದ ಸದಸ್ಯರಿಗೆ ಇನ್ನೂ ಸಾಧ್ಯವಾಗಿರಲಿಲ್ಲ. ಕಳೆದ ಜೂನ್ನಲ್ಲಿಯೇ ಯೋಜನಾ ವರದಿಯು ಸಿದ್ಧಗೊಂಡಿದ್ದು, ಅದರ ಪ್ರಕಾರ ಪ್ರತ್ಯೇಕ ಕೋಶವೊಂದನ್ನು (ಸೆಲ್) ರಚಿಸಿ ರಾಜ್ಯ ಸರ್ಕಾರ ಆದೇಶ ಕೂಡ ಹೊರಡಿಸಿತ್ತು. ಇದಾಗಿ ಏಳು ತಿಂಗಳ ನಂತರ ಇದೀಗ ಸರ್ಕಾರ ಸ್ಪಷ್ಟ ಕಾರ್ಯನೀತಿಯನ್ನು ಪ್ರಕಟಿಸಲಾಗಿದೆ.
ಈ ಯೋಜನೆಯಡಿ ಸರ್ಕಾರಿ ನೌಕರನ ಪತಿ ಅಥವಾ ಪತ್ನಿ, ತಂದೆ ಮತ್ತು ತಾಯಿ (ಮಲ ತಾಯಿಯನ್ನೊಳಗೊಂಡಂತೆ (ಅವರು ಸರ್ಕಾರಿ ನೌಕರನೊಂದಿಗೆ ಸಾಮಾನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ- ಕನಿಷ್ಠ ಕುಟುಂಬ ಪಿಂಚಣಿ ರೂ.8500 ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರದಿದ್ದಲ್ಲಿ), ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿರುವ ಮಕ್ಕಳು (ದತ್ತು ಪಡೆದ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡಂತೆ) ವೈದ್ಯಕೀಯ ಸೇವೆ ಪಡೆಯಲು ಅರ್ಹರಾಗಿರುತ್ತಾರೆ.
ರಾಜ್ಯ ಸರ್ಕಾರಿ ನೌಕರರ ಸಂಘವು ಈ ಯೋಜನೆಯ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೇರುತ್ತಲೇ ಬಂದಿತ್ತು. ಸದ್ಯವೇ ಈ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈಗ ಕಾರ್ಯನೀತಿಯನ್ನು ಪ್ರಕಟಿಸಲಾಗಿದೆ.
ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜಾರಿಗೆ ತರುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಒಳಪಟ್ಟಿದ್ದು, ಈ ಟ್ರಸ್ಟ್ ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದ ಆಯುಷ್ಮಾನ್ ಭಾರತ – ಆರೋಗ್ಯ ಕರ್ನಾಟಕ ಯೋಜನೆಯನ್ನು ನಿರ್ವಹಿಸುತ್ತಿದೆ. ಸರ್ಕಾರಿ ನೌಕರರಿಗೆ ರೂಪಿಸಲಾಗಿರುವ ಈ ಯೋಜನೆ ಕೂಡ ಇದರ ಅಡಿಯಲ್ಲಿಯೇ ಬರಲಿದೆ.

No comments:
Post a Comment